

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯನ್ನು ನಂಬಿದ ವಿಚ್ಛೇದಿತ ಮಹಿಳೆಯೊಬ್ಬರು ಬರೋಬ್ಬರಿ ₹1.75 ಕೋಟಿ ಕಳೆದುಕೊಂಡಿರುವ ಸೈಬರ್ ವಂಚನೆ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಉತ್ತರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಯಶವಂತಪುರ ನಿವಾಸಿಯಾಗಿರುವ ಮಹಿಳೆಗೆ ಫೇಸ್ಬುಕ್ನಲ್ಲಿ ವ್ಯಕ್ತಿಯೊಬ್ಬ ಪರಿಚಯವಾಗಿದ್ದ. ತಾನು ಯುನೈಟೆಡ್ ಕಿಂಗ್ಡಮ್ (ಯುಕೆ)ನಲ್ಲಿ ಉದ್ಯೋಗದಲ್ಲಿದ್ದೇನೆ ಎಂದು ಪರಿಚಯಿಸಿಕೊಂಡ ಆತ, ಬಳಿಕ ವಾಟ್ಸಾಪ್ ಮೂಲಕ ನಿರಂತರ ಸಂಪರ್ಕದಲ್ಲಿದ್ದು ಮಹಿಳೆಯ ವಿಶ್ವಾಸ ಗಳಿಸಿದ್ದಾನೆ.
ಬಳಿಕ ಯುಕೆಯಿಂದ ಚಿನ್ನಾಭರಣ, ವಜ್ರಾಭರಣ ಹಾಗೂ ದುಬಾರಿ ಸೀರೆಗಳನ್ನು ಉಡುಗೊರೆಯಾಗಿ ಕಳುಹಿಸುತ್ತೇನೆ ಎಂದು ಹೇಳಿ ಅವುಗಳ ಫೋಟೋಗಳು ಹಾಗೂ ನಕಲಿ ಕೊರಿಯರ್ ರಸೀದಿಯನ್ನೂ ಕಳುಹಿಸಿದ್ದಾನೆ.
ಕೆಲ ದಿನಗಳ ಬಳಿಕ ದೆಹಲಿ ಕಸ್ಟಮ್ಸ್ನಲ್ಲಿ ಉಡುಗೊರೆಗಳು ತಡೆಹಿಡಿಯಲ್ಪಟ್ಟಿದ್ದು, ಅವುಗಳನ್ನು ಬಿಡುಗಡೆ ಮಾಡಲು ಹಣ ಪಾವತಿಸಬೇಕು ಎಂದು ಹೇಳಿದ್ದಾನೆ. ತನ್ನ ಬಳಿ ಭಾರತೀಯ ಕರೆನ್ಸಿ ಇಲ್ಲದ ಕಾರಣ ಮಹಿಳೆಯೇ ಮೊದಲು ಹಣ ಪಾವತಿಸಬೇಕೆಂದು ಮನವೊಲಿಸಿದ್ದಾನೆ.
ಇದಾದ ನಂತರ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಮತ್ತೊಬ್ಬ ವ್ಯಕ್ತಿ ಕರೆ ಮಾಡಿ, ವಿವಿಧ ಶುಲ್ಕಗಳ ಹೆಸರಿನಲ್ಲಿ ಹಣ ವರ್ಗಾವಣೆ ಮಾಡಿಸುವಂತೆ ಸೂಚಿಸಿದ್ದಾನೆ. ಮಹಿಳೆ ಆರ್ಟಿಜಿಎಸ್ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಹಣ ಪಾವತಿಸಿದ್ದು, ಕೆಲ ಸಂದರ್ಭಗಳಲ್ಲಿ ಆರೋಪಿಗಳು ಖುದ್ದಾಗಿ ಬಂದು ಹಣವೂ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಹೀಗೆ ಹಂತ ಹಂತವಾಗಿ ಹಣ ಪಡೆದ ವಂಚಕರು, ಮಹಿಳೆಯಿಂದ ಒಟ್ಟು ₹1.75 ಕೋಟಿ ಪಡೆದು ವಂಚಿಸಿದ್ದಾರೆ. ಬಳಿಕ ಅನುಮಾನಗೊಂಡ ಮಹಿಳೆ ಯುಕೆ ವ್ಯಕ್ತಿಯನ್ನು ಸಂಪರ್ಕಿಸಲು ಯತ್ನಿಸಿದಾಗ ಆತನ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ತಾನು ಮೋಸ ಹೋಗಿರುವುದು ತಿಳಿದು ಬಂದಿದೆ.
ಈ ಸಂಬಂಧ ಮಹಿಳೆ ಉತ್ತರ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 318ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೈಬರ್ ವಂಚಕರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.