


ಬ್ರಹ್ಮಾವರ,: ರತ್ನಶೀಲ ಶಿಕ್ಷಣ ಸಂಸ್ಥೆ (ರಿ)ಯಿಂದ ನಡೆಸಲ್ಪಡುವ ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪಾಲಕರ ಸಭೆಯು ಶನಿವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಿರಂತನ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷೆ ಡಾ. ಚಿಂತನಾ ರಾಜೇಶ್ ಹಾಗೂ ಸ್ಪರ್ಧಾ ಸಾರಥಿ KAS ಅಕಾಡೆಮಿಯ ಸ್ಥಾಪಕಾಧ್ಯಕ್ಷ ಆದರ್ಶ ಶೆಟ್ಟಿ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆ, ಶಿಕ್ಷಣದ ಮಹತ್ವ ಹಾಗೂ ಪಾಲಕರ ಜವಾಬ್ದಾರಿಯ ಕುರಿತು ಮನಮುಟ್ಟುವಂತೆ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವ ದೃಷ್ಟಿಯಿಂದ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿತು. ಐದನೇ ಮತ್ತು ಆರನೇ ತರಗತಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಭೂತ ತರಬೇತಿ, ಕರಿಯರ್ ಗೈಡೆನ್ಸ್ ಕಾರ್ಯಕ್ರಮಗಳು ಮತ್ತು ಕ್ರಿಕೆಟ್ ಕೋಚಿಂಗ್ ತರಗತಿಗಳನ್ನು ಶೀಘ್ರವೇ ಆರಂಭಿಸುವುದಾಗಿ ತಿಳಿಸಿದ್ದು, ಪಾಲಕರು ಈ ಹೊಸ ಯೋಜನೆಗಳನ್ನು ಸ್ವಾಗತಿಸಿ ಶಾಲೆಯ ಪ್ರಯತ್ನವನ್ನು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮನೋಹರ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಪಾವನ ಎಂ. ಹೆಗ್ಡೆ, ವಿಭಾಗೀಯ ಮುಖ್ಯಸ್ಥೆಯರಾದ ಸಂಗೀತಾ ಅಡಿಗ ಹಾಗೂ ಸರಸ್ವತಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ಪಠ್ಯೇತರ ಚಟುವಟಿಕೆಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಅಲ್ಲದೆ, ಶಾಲೆಯ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಪಾಲಕರೊಂದಿಗೆ ನೇರ ಸಂವಾದ ನಡೆಸಿದರು. ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪಾಲಕರ ಸಹಕಾರ ಅತ್ಯಗತ್ಯವೆಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.