


ಕುಂದಾಪುರ:ಮನೆಯವರು ಇಲ್ಲದ ವೇಳೆ ಮನೆಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಕುಂದಾಪುರದ ಬೊಬ್ಬರ್ಯನಕಟ್ಟೆಯಲ್ಲಿ ಗುರುವಾರ ನಡೆದಿದೆ.
ಬೊಬ್ಬರ್ಯನಕಟ್ಟೆಯ ಎದುರಿನ ಶಾರದಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರ ಪುತ್ರ ವಿಜಯ್ ನವೀನ್ ಕುಮಾರ್ ಅವರು ತಾಯಿಯನ್ನು ಕೋಟದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ಬಿಟ್ಟು ಆ.8ರಂದು ಮುಂಬೈಗೆ ತೆರಳಿದ್ದರು. ಆ.13ರಂದು ಬೆಳಗ್ಗೆ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಆಯುಧ ಬಳಸಿ ಮನೆಯ ಮುಂಭಾಗದ ಬಾಗಿಲಿನ ಚಿಲಕವನ್ನು ಮುರಿದು ಒಳನುಗ್ಗಿದ್ದಾರೆ ಎನ್ನಲಾಗಿದೆ. ಬಳಿಕ ಮನೆಯ ಕಪಾಟಿನಲ್ಲಿದ್ದ ಸುಮಾರು 8 ಗ್ರಾಂ ಚಿನ್ನಾಭರಣ ಹಾಗೂ ವಿದೇಶಿ ಕರೆನ್ಸಿಯನ್ನು ಕಳವು ಮಾಡಿದ್ದಾರೆ.
ಕಳವಾಗಿರುವ ಚಿನ್ನಾಭರಣ ಹಾಗೂ ನಗದಿನ ಒಟ್ಟು ಮೌಲ್ಯ ಸುಮಾರು 95 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಗೌಡ, ನಗರ ಠಾಣೆ ಪಿಎಸ್ಐ ಪುಷ್ಪಾ ಹಾಗೂ ಇತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.