


ಉಡುಪಿ: ಆಗುಂಬೆ ಘಾಟಿಯಲ್ಲಿ ರಸ್ತೆ ಅಗಲೀಕರಣ ಹಾಗೂ ಟನಲ್ ನಿರ್ಮಾಣ ಕುರಿತು ರಾಜ್ಯ ಸರ್ಕಾರ ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಡಬಲ್ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆಯ ಅನುಮತಿ ಸೇರಿದಂತೆ ಹಲವು ತಾಂತ್ರಿಕ ಹಾಗೂ ಪರಿಸರ ಸಂಬಂಧಿತ ಸವಾಲುಗಳಿವೆ ಎಂದು ಹೇಳಿದರು.
ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಮೊದಲಿಗೆ ಹೆಬ್ರಿ ಹಾಗೂ ಕಾರ್ಕಳ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಬೆಂಗಳೂರಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆಗುಂಬೆ ಘಾಟಿ ರಸ್ತೆ ಅಗಲೀಕರಣದ ಸಾಧ್ಯತೆಗಳನ್ನು ಪರಿಶೀಲಿಸುವ ಉದ್ದೇಶದಿಂದಲೇ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ಸಚಿವರು ಹೇಳಿದರು.
ಕೇಂದ್ರ ಸರ್ಕಾರ ಆಗುಂಬೆ ಟನಲ್ ಯೋಜನೆಗೆ ಟೆಂಡರ್ ಆಹ್ವಾನಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಟೆಂಡರ್ ಕರೆಯಲಾಗಿದ್ದರೂ ಇದುವರೆಗೆ ಯಾರೂ ಅರ್ಜಿ ಸಲ್ಲಿಸಿಲ್ಲ. ಯೋಜನೆಯ ವಿವರ ವರದಿ (ಡಿಪಿಆರ್) ಸೇರಿದಂತೆ ಹಲವು ವಿಷಯಗಳಲ್ಲಿ ಇನ್ನೂ ಸ್ಪಷ್ಟತೆ ಇಲ್ಲ ಎಂದು ಹೇಳಿದರು.
ಸಕಲೇಶಪುರ ಘಾಟಿಯ ಸಮಸ್ಯೆಯನ್ನು ಕಳೆದ ಮೂರು ವರ್ಷಗಳಲ್ಲಿ ಪರಿಹರಿಸಲಾಗಿದ್ದು, ಚಾರ್ಮಾಡಿ ಘಾಟಿ ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ ಅಥವಾ ಮಂತ್ರಿಮಂಡಲದ ಕೆಲಸಕ್ಕೆ ಸಂಬಂಧಿಸಿರಬಹುದು ಎಂದು ಹೇಳಿದರು.
ಇದೇ ವೇಳೆ ಸಚಿವ ಸಂಪುಟ ಪುನರ್ರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನ ನೀಡುವುದು ಅಥವಾ ಬದಲಾವಣೆ ಮಾಡುವುದು ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್ನ ನಿರ್ಧಾರವಾಗಿದೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.